ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿಯಾದ ಮಿನಿ ಮಹಾಸಮರ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಮಂಗಳವಾರ (ಡಿ. 12) ಪ್ರಕಟವಾಗಲಿದೆ.
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತಗಟ್ಟೆ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಕಾಂಗ್ರೆಸ್, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಬಿಜೆಪಿ- ಕಾಂಗ್ರೆಸ್, ಮಿಜೋರಾಂನಲ್ಲಿ ಮಿಜೋರಾಂ ನ್ಯಾಷನಲ್ ಫ್ರಂಟ್-ಕಾಂಗ್ರೆಸ್ ನಡುವೆ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಬಹುಮತ ಇಲ್ಲದಿದ್ದರೂ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಮೊದಲಿಗೆ ಆಹ್ವಾನ ನೀಡಿದ ಘಟನೆಯಿಂದಾಗಿ ಎಚ್ಚೆತ್ತಿರುವ ಕಾಂಗ್ರೆಸ್- ಟಿಡಿಪಿ ನೇತೃತ್ವದ `ಮಹಾಕೂಟಮಿ’ ಪಕ್ಷಗಳು, ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಮಾತು ಇದೆ.
ಫಲಿತಾಂಶ ಬಂದ ಕೂಡಲೇ ಸರ್ಕಾರ ರಚನೆಗೆ ನಮ್ಮನ್ನು ಆಹ್ವಾನಿಸಬೇಕು ಅಂತ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಅವರಿಗೂ ಮನವಿ ಸಲ್ಲಿಸಿರುವುದಾಗಿ ಗೊತ್ತಾಗಿದೆ. ಈ ಬೆನ್ನಲ್ಲೇ ಕೆಸಿಆರ್ಗೆ ಬೆಂಬಲ ನೀಡೋದಾಗಿ ಎಂಐಎಂನ ಓವೈಸಿ ಹೇಳಿದ್ದಾರೆ.
ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಚುನಾವಣಾ ಫಲಿತಾಂಶ ಪೂರ್ತಿಯಾಗಿ ಹೊರಬೀಳಲಿದ್ದು, ಅಧಿಕಾರದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂದು ಕಾದು ನೋಡಬೇಕು.