ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜಧಾನಿಯಲ್ಲಿನ ಅಂಗಡಿ ಮುಂಗಟ್ಟುಗಳು ಸೇರಿದಂತೆ ಪ್ರತಿಯೊಂದು ವಾಣಿಜ್ಯ ಕಟ್ಟಡಗಳ ಮೇಲೆ ಶೇಕಡ ರಷ್ಟರು ಕನ್ನಡ ನಾಮಫಲಕ ಅಳವಡಿಸಲು ಫೆಬ್ರವರಿ 28ರ ತನಕ ಅವಕಾಶ ನೀಡಲಾಗಿತ್ತು. ಈ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬರೆದಿರುವ ಅವರು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.
ನಾಮಫಲಕಗಳಲ್ಲಿ ಶೇಕಡ 60ಷ್ಟು ಕನ್ನಡ ಬಳಕೆ ಸಂಬಂಧ 55,187 ಮಳಿಗೆಗಳಿಗೆ ನೋಟಿಸ್ ನೀಡಲಾಗಿತ್ತು. ಇದರಲ್ಲಿ 52,134 ಮಳಿಗೆಗಳು ಬಿಬಿಎಂಪಿ ಸೂಚನೆಯನ್ನು ಪಾಲಿಸಿವೆ. ಇನ್ನು 3,044 ಮಳಿಗೆಗಳು ಬದಲಾವಣೆ ಮಾಡಿಕೊಂಡಿಲ್ಲ. ನೀಡಿರುವ ಕಾಲಾವಧಿಯಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.