ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶುಕ್ರವಾರ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಕಳೆದ ಏಳೆಂಟು ವರ್ಷಗಳಲ್ಲಿ ಪಕ್ಷದೊಳಗೆ ಸಂಘರ್ಷದ ಪರಿಣಾಮ ಈ ಘಟನೆ ಸಂಭವಿಸಿದೆ. ಪಕ್ಷಕ್ಕಾಗಿ ದುಡಿದ ನಾಯಕರನ್ನು ಬಿಟ್ಟು, ಗಂಭೀರವಿಲ್ಲದ ವ್ಯಕ್ತಿಯ ಕೈಗೆ ಪಕ್ಷ ಕೊಡುವ ಯತ್ನ ನಡೆಸಲಾಗುತ್ತಿದೆ ಎನ್ನುವ ಮೂಲಕ ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ತನಗೆ ಲಭ್ಯವಾದ ಜಾಗಗಳನ್ನು ಬಿಜೆಪಿಗೆ, ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟು ಕೊಟ್ಟಿದೆ. ಹೀಗೆ ಸಾಕಷ್ಟು ವಿಚಾರಗಳನ್ನು ತಮ್ಮ ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ಬರೆದು, ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆ.