ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ. ಜೊತೆಗೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಮಳೆಗೆ ಸಂಬಂಧಿಸಿದಂತೆ ಇದುವರೆಗೂ 38 ಜನರು ಮೃತಪಟ್ಟಿದ್ದಾರೆ. ಅವರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವಡೆ ಉತ್ತಮ ಮಳೆಯಾಗುತ್ತಿದೆ. ಮತ್ತೆ ಕೆಲವು ಕಡೆ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. 38 ಜನರು ಮೃತಪಟ್ಟಿದ್ದಾರೆ. 35 ಜನರು ಗಾಯಗೊಂಡಿದ್ದಾರೆ. 57 ಮನೆಗಳು ಸಂಪೂರ್ಣ ಬಿದ್ದಿವೆ. 208 ಮನೆಗಳು ತುಂಬಾ ಹಾನಿಯಾಗಿವೆ. 2,682 ಮನೆಗಳು ಅರ್ಧದಷ್ಟು ಹಾನಿಯಾಗಿವೆ. 105 ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ.
185 ಹೆಕ್ಟೇರ್ ಬೆಳೆ ಹಾನಿಯಾಗಿದೆ. 356 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. 541 ಹೆಕ್ಟೇರ್ ಪ್ರದೇಶಕ್ಕೆ ನೀರು ನುಗ್ಗಿದ್ದು ರೈತರಿಗೆ ತೀವ್ರ ತೊಂದರೆಯಾಗಿದೆ. ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಇನ್ನು 189 ಸೇತುವೆಗಳು, 859 ಶಾಲೆಯ ರೂಮುಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿವೆ. ಎರಡು ಕಡೆ ಸಂತ್ರಸ್ಥರಿಗೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಅಂತಾ ಸಿಎಂ ತಿಳಿಸಿದ್ದಾರೆ.