ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭರ್ಜರಿ ಮಳೆಯಿಂದಾಗಿ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಇದ್ರಿಂದಾಗಿ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ವಿದ್ಯುತ್ ಉತ್ಪಾದನಾ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಇಂದು ಜಲಾಶಯಕ್ಕೆ ಒಳಹರಿವು 73791 ಕ್ಯೂಸೆಕ್ ನೀರು ಹರಿದು ಬಂದಿದೆ. ಹೊರಹರಿವು 21130 ಇದ್ದು, ಇದರಿಂದ 55 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಘಟಕಗಳು ಕಾರ್ಯ ಆರಂಭಿಸಿವೆ. ಮಹಾರಾಷ್ಟ್ರದಲ್ಲಿ ಜಲಾಶಯದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಸಧ್ಯ ಪ್ರವಾಹ ಭೀತಿ ಇಲ್ಲ. ಮುನ್ನೆಚ್ಚರಿಕೆಯಾಗಿ ನದಿ ತಟದಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನು ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಿದ್ಧಗೊಂಡಿದ್ದು, ಅಗತ್ಯ ಬೋಟ್, ಇನ್ನಿತರ ಸಾಮಗ್ರಿ ಸಂಗ್ರಹಿಸಲಾಗಿದೆ. ಈಗಾಗಲೇ ನದಿ ಪಾತ್ರದ ಅಧಿಕಾರಿಗಳ ಸಭೆ ಮಾಡಲಾಗಿದೆ. ತಕ್ಷಣ ಪ್ರವಾಹ ಎದುರಾದರೂ ನಿಭಾಯಿಸಲು ಅಧಿಕಾರಿಗಳು ಸಿದ್ಧರಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ