ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ 2014ರಲ್ಲಿ 17 ಸ್ಥಾನ ನೀಡಿದ್ದೀರಿ. 2019ರಲ್ಲಿ 25 ಸ್ಥಾನ ನೀಡಿದ್ದೀರಿ. ಈ ಬಾರಿ ಜನರಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಮೈತ್ರಿಕೂಟಕ್ಕೆ 28 ಸ್ಥಾನಗಳಲ್ಲಿಯೂ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ನಡೆದ ಶಕ್ತಿ ಕೇಂದ್ರ ಮುಖಂಡರ, ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ 23 ವರ್ಷಗಳ ಕಾಲ ಅಧಿಕಾರ ನಡೆಸಿದ ಮೋದಿ ಅವರು ಶೂನ್ಯ ಭ್ರಷ್ಟಾಚಾರ ಹೊಂದಿದ್ದಾರೆ. ಆದರೆ, ಮನಮೋಹನ್ ಸಿಂಗ್, ಸೋನಿಯಾ ಗಾಂಧಿಯವರ 10 ವರ್ಷದ ಕಾಂಗ್ರೆಸ್ ಆಡಳಿತದಲ್ಲಿ 12 ಲಕ್ಷ ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಆರೋಪಿಸಿದರು.
ಎನ್ ಡಿಎ ಮೋದಿ ನಾಯಕತ್ವದಲ್ಲಿ ಚುನಾವಣೆ ಕಣದಲ್ಲಿದೆ. ಕುಟುಂಬ ರಾಜಕೀಯ ನಡೆಸುವ ಭ್ರಷ್ಟಾಚಾರಿಗಳನ್ನು ಹೊಂದಿದ ಇಂಡಿಯಾ ಮೈತ್ರಿಕೂಟ ಮತ್ತೊಂದು ಕಡೆ ಇದೆ. ಈ ಜನರಿಗೆ ಅಧಿಕಾರ ಸಿಕ್ಕಾಗಲೆಲ್ಲ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದರು.
ಈ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕರ್ನಾಟಕ ಚುನಾವಣೆ ಉಸ್ತುವಾರಿ ರಾಧಾಮೋಹನ್ ದಾಸ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.