ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಶುರು ಮಾಡಿರುವ ಆಶಾ ಕಾರ್ಯಕರ್ತೆಯರು, ಫ್ರೀಡಂ ಪಾರ್ಕ್ ವರೆಗೂ ನಡೆಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ್ದು, ವಿಧಾನಸೌಧ ಮುತ್ತಿಗೆಗೆ ಯತ್ನಿಸಲಾಗಿದೆ. ತಮ್ಮ ಬೇಡಿಕೆ ಈಡೇರಿಸದೆ ಹೋದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿರುವುದ್ರಿಂದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗಿನ ರಸ್ತೆ ಮಾರ್ಗಗಳು ಸಂಪೂರ್ಣ ಸಂಚಾರ ದಟ್ಟಣೆ ನಿರ್ಮಾಣವಾಗಿದೆ. ಇದನ್ನ ಸರಿಪಡಿಸಲು ಪೊಲೀಸ್ರು ಹರಸಾಹಸ ಪಡ್ತಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನ ಈಡೇರಿಸುವುದಾಗಿ ಈ ಹಿಂದೆ ಹೇಳಲಾಗಿತ್ತು. ಅದು ಇನ್ನೂ ಆಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸೇರಿ ತಿಂಗಳಿಗೆ 12 ಸಾವಿರ ರೂಪಾಯಿ ಸಂಬಳ, 15 ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹ ಧನ ನೀಡಬೇಕು. ಇದರ ಜೊತೆಗೆ ವಿವಿಧ ಬೇಡಿಕೆಗಳನ್ನ ಈಡಲಾಗಿದೆ. ದೆಹಲಿಯಲ್ಲಿರುವ ಆರೋಗ್ಯ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಆಶಾ ಕಾರ್ಯಕರ್ತರ ಸಂಘಟನೆಯ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಸಮಸ್ಯೆ ಬಗೆಹರಿಸಲಾಗುವುದು ಅಂತಾ ತಿಳಿಸಿದ್ದಾರೆ.