ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕಾಲೇಜುವೊಂದರಲ್ಲಿ ಕನ್ನಡದ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪುಂಡ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಅನ್ನೋ ಕೂಗು ಹೆಚ್ಚಾಗಿದೆ. ಕನ್ನಡದ ನೆಲದಲ್ಲಿ ಕನ್ನಡದ ಬಾವುಟ ಹಾರಿಸಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕು ಎಂದು ಕನ್ನಡಿಗರು ಸಿಡಿದೆದ್ದಿದ್ದಾರೆ.
ಹಲ್ಲೆ ಮಾಡಿದ ವಿದ್ಯಾರ್ಥಿಗಳನ್ನು ಕೂಡಲೇ ಕಾಲೇಜಿನಿಂದ ಅಮಾನತು ಮಾಡಬೇಕು. ಅವರ ವಿರುದ್ಧ ಪೊಲೀಸರು ಮುಲಾಜಿಲ್ಲದೇ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇನ್ನೆರಡು ದಿನಗಳಲ್ಲಿ ಈ ರೀತಿ ನಡೆದುಕೊಳ್ಳದೆ ಹೋದರೆ ದೊಡ್ಡ ಮಟ್ಟದ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಈಗಾಗ್ಲೇ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕ್ಯಾತೆ ತೆಗೆಯಲಾಗುತ್ತಿದೆ. ಇದರಿಂದಾಗಿ ಎರಡೂ ರಾಜ್ಯಗಳಲ್ಲಿ ಒಂದಿಷ್ಟು ರಾಜಕೀಯ ಮೇಲಾಟಗಳು ನಡೆದಿವೆ. ಈ ಹೊತ್ತಿನಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ ಅನ್ನೋ ಆಕ್ರೋಶ ವ್ಯಕ್ತವಾಗಿದೆ.