ಬೆಂಗಳೂರು: ನಾಡಿನಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಇನ್ನು ಸಿಲಿಕಾನ್ ಸಿಟಿಯಲ್ಲೂ ವರುಣ ಮುಂಜಾನೆಯೇ ಕಾಣಿಸಿಕೊಂಡಿದ್ದಾನೆ. ಅಲ್ದೇ, ಮುಂದಿನ ಮೂರು ದಿನಗಳ ಕಾಲ ಭರ್ಜರಿಯಾಗಿ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ನಗರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅರಬ್ಬಿ ಸಮುದ್ರ ಮತ್ತು ಪಶ್ಚಿಮ ಬಂಗಾಳ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ತುಂಬಾ ಮಳೆಯಾಗ್ತಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಮತ್ತೆ ನೆರೆಯ ಸಂಕಷ್ಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಈಗಾಗ್ಲೇ 6 ಮಂದಿ ಜೀವ ಕಳೆದುಕೊಂಡಿದ್ದಾರೆ.
ಐಟಿಸಿಟಿಯಲ್ಲಿ ಅಕ್ಟೋಬರ್ 25ರ ತನಕ ಮಳೆಯಾಗಲಿದೆ. ಮುಂಜಾಗ್ರತ ಕ್ರಮಗಳನ್ನ ಕೈಗೊಳ್ಳುವಂತೆ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಸಂಸ್ಥೆಯ ನಿರ್ದೇಶಕರಾದ ಜಿ.ಎಸ್ ಶ್ರೀನಿವಾಸ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಕನಿಷ್ಟ 124.5 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.