ಪ್ರಜಾಸ್ತ್ರ ಸುದ್ದಿ
ಮೈಸೂರು: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಕರ್ನಾಟಕಕ್ಕೆ ಕಾಲಿಟ್ಟಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದಾರೆ.
ಶುಕ್ರವಾರ ಚಾಮರಾಜನಗರ, ಕೊಳ್ಳೇಗಾಲ, ಹನ್ನೂರು ವಿಧಾನಸಭಾ ಕ್ಷೇತ್ರ, ಗುಂಡ್ಲಪೇಟೆ ಕ್ಷೇತ್ರ ಸೇರಿದಂತೆ ಎಲ್ಲೆಡೆ ಸಂಚರಿಸಿದೆ. ಗುಂಡ್ಲುಪೇಟೆಯಲ್ಲಿ ಸಾರ್ವಜನಿಕ ಭಾಷಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಸಾವಿರಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದೆ. ಇದನ್ನು ಮೀರಿ ಕಾರ್ಯಕರ್ತರು ಆಗಮಿಸಿದ್ದಾರೆ.
ಪಾದಯಾತ್ರೆಯ ರಸ್ತೆಯ ಉದ್ದಕ್ಕೂ ವಿವಿಧ ಕಲಾ ತಂಡಗಳು ಭಾಗವಹಿಸಿವೆ. ಕಂಸಾಳೆ, ವೀರಗಾಸೆ, ಗೊರವರ ಕುಣಿತ, ಡೋಲು, ಸೋಲಿಗರ ನೃತ್ಯ, ವೀರಭದ್ರ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿವೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದಾರೆ. ಶುಕ್ರವಾರ 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ಇಂದು ಅದನ್ನು ಮೀರಿ 30 ಸಾವಿರಕ್ಕೂ ಅಧಿಕ ಜನರು ಸೇರಿದ್ದಾರೆ.
ಪಾದಯಾತ್ರೆಯ ಉದ್ದಕ್ಕೂ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗುತ್ತಿದೆ. ದೇಶವನ್ನು ಧರ್ಮದ ಹೆಸರಿನಲ್ಲಿ ಒಡೆಯುವ ಕೆಲಸ ಮಾಡುತ್ತಿರುವ, ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ಹಾಳು ಮಾಡುತ್ತಿರುವ ಸರ್ಕಾರಗಳ ವಿರುದ್ಧ ಕೈ ನಾಯಕರು ಕಿಡಿ ಕಾರುತ್ತಿದ್ದಾರೆ.