ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಶನಿವಾರ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಾಹಿತಿ ನೀಡಿದ್ದಾರೆ. ಮಹತ್ವದ ದಾಖಲೆಗಳು, ಲೆಕ್ಕಕ್ಕೆ ಸಿಗದ 31 ಲಕ್ಷ ರೂಪಾಯಿ ವಶಕ್ಕೆ ಪಡೆದಿರುವ ಬಗ್ಗೆ ತಿಳಿಸಲಾಗಿದೆ.
ಶಾಸಕರ ತಂದೆ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿತ್ತು. ವಿಧಾನಸಭೆ ಚುನಾವಣೆಗೂ ಕೆಲ ತಿಂಗಳ ಮೊದಲು ಶಾಸಕ ಭರತ್ ರೆಡ್ಡಿ 42 ಕೋಟಿ ಹಣವನ್ನು ಅಕ್ರಮವಾಗಿ ಸಂಗ್ರಹಿಸಿ ಬಳಸಿಕೊಂಡಿದ್ದಾರೆ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ.
ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದರ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.