ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಿಎಂ, ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದೆ. ಲಿಂಗಾಯತ ಸಮುದಾಯದ ಕುರಿತು ನೀಡಿರುವ ಹೇಳಿಕೆ ಸಂಬಂಧ ದೂರು ಸಲ್ಲಿಸಿದೆ. ಲಿಂಗಾಯತ ಯುವ ವೇದಿಕೆ ಕಾನೂನು ಘಟಕ ವತಿಯಿಂದ ದೂರು ಸಲ್ಲಿಸಿದೆ.
ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಇಡೀ ಲಿಂಗಾಯತ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಎಂದು ವಾಗ್ದಾಳಿ ನಡೆಸಲಾಗುತ್ತಿದೆ. ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಇದೊಂದು ಅಸ್ತ್ರ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ನಾನು ಬೊಮ್ಮಾಯಿ ಅವರ ಕುರಿತಾಗಿ ನೀಡಿದ ಹೇಳಿಕೆಯೇ ಹೊರತು ಇಡೀ ಲಿಂಗಾಯತ ಸಮುದಾಯದ ಕುರಿತು ಅಲ್ಲ ಎಂದು ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಯಾವುದೇ ಜಾತಿ, ಧರ್ಮ, ಸಮುದಾಯದ ವಿರುದ್ಧ ಹೇಳಿಕೆ ನೀಡುವಂತಿಲ್ಲ ಎಂದು ಚುನಾವಣೆ ಆಯೋಗ ಹೇಳಿದೆ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.