ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರು ಬುಧವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿಗೆ ಆಗಮಿಸಿದ್ದ ಭೂಪೇಂದ್ರ ಯಾದವ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನ ಬುಧವಾರ ಸಂಜೆ ದೇವನಹಳ್ಳಿ ರೆಸಾರ್ಟ್ ವೊಂದರಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭೂಪೇಂದ್ರ ಯಾದವ್ ಹಾಗೂ ಸಿಎಂ ಯಡಿಯೂರಪ್ಪ ಮಾತುಕತೆ ನಡೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಭೂಪೇಂದ್ರ ಯಾದವ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದ ಮೇರೆಗೆ ಸಿಎಂರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅಲ್ದೇ, ಸಿಎಂ ಪುತ್ರ, ಸಂಸದ ಬಿ.ವೈ ರಾಘವೇಂದ್ರ ಅವರನ್ನ ಕೇಂದ್ರ ಮಂತ್ರಿ ಮಾಡುವ ಲೆಕ್ಕಾಚಾರ ನಡೆದಿದೆಯಂತೆ.
ಸುರೇಶ ಅಂಗಡಿ ನಿಧನದಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಖಾಲಿಯಾಗಿದೆ. ಇತ್ತ ಯಡಿಯೂರಪ್ಪನವರನ್ನ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ರೆ, ಅದರ ಅಸಮಾಧಾನವನ್ನ ತಣಿಸಲು ಈ ಪ್ಲಾನ್ ಅಂತೆ. ಇದರ ಜೊತೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರಗೂ ಸಹ ರಾಜ್ಯದಲ್ಲಿ ಸೂಕ್ತ ಸ್ಥಾನಮಾನ ನೀಡುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗ್ತಿದೆ.