ಪ್ರಜಾಸ್ತ್ರ ಸುದ್ದಿ
ಮಂಡ್ಯ/ಬೆಂಗಳೂರು: ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುವ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಸಹ ಕರ್ನಾಟಕದ ವಿರುದ್ಧವೇ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ರೈತ ಪರ, ಕನ್ನಡ ಪರ ಸಂಘಟನೆಗಳ ಹೋರಾಟ ಭುಗಿಲೆದ್ದಿದೆ.
ಸುಪ್ರೀಂ ಕೋರ್ಟ್ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ನಾಯಕರು ಕೇಂದ್ರದಲ್ಲಿ ಕುಳಿತು ಏನು ಮಾಡುತ್ತಿದ್ದಾರೆ. ಸಂಸದರೆಲ್ಲ ರಾಜೀನಾಮೆ ಕೊಟ್ಟು ಆದೇಶ ಖಂಡಿಸಲಿ ಎಂದರು. ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇನ್ನು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಒಂದು ವೇಳೆ ಬಿಟ್ಟರೆ ಇನ್ನು ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹೇಳಿ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದರು. ಹೀಗಾಗಿ ಎಲ್ಲೆಡೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.