ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ನಗರದ ಫ್ರೀಡ್ಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ರಾಜ್ಯದ ಪರಿಸ್ಥಿತಿ ಸಂಕಷ್ಟವಾಗಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಈ ಸಮಸ್ಯೆ ದಶಕಗಳಿಂದ ನಡೆದುಕೊಂಡು ಬಂದಿದೆ. ಸರ್ಕಾರದ ಇಚ್ಛಾ ಶಕ್ತಿಯ ಕೊರತೆಯಿಂದಾಗಿ ಸಮಸ್ಯೆ ಹಾಗೇ ಉಳಿಯುತ್ತಿದೆ. ಇದಕ್ಕಾಗಿ ನಾವು ಜೈಲಿಗೂ ಹೋಗಲು ಸಿದ್ಧ ಎಂದರು.
ಕಾವೇರಿ ವಿಚಾರದಲ್ಲಿ ಮೂರು ಪಕ್ಷಗಳು ಜನರ ಹಿತ ಮರೆತಿವೆ. ನಮ್ಮ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು. ಕಾವೇರಿ ಇಲ್ಲದಿದ್ದರೆ ಬೆಂಗಳೂರಿಗೆ ನೀರಿನ ಸಮಸ್ಯೆ ಆಗಲಿದೆ. ಹೀಗಾಗಿ ನಗರದ ನಿವಾಸಿಗಳು, ಚಲನಚಿತ್ರ ಕಲಾವಿದರು, ಸಾಹಿತಿಗಳು, ಗಣ್ಯರು ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು. ಖಾಲಿ ಕೊಡ, ಬಕೆಟ್ ತಲೆ ಮೇಲೆ ಹೊತ್ತುಕೊಂಡು ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ನಡೆಯನ್ನು ಖಂಡಿಸಲಾಯಿತು.