ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಹೀಗಾಗಿ ನಸುಕಿನ ಜಾವ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಯಾವುದೇ ರೀತಿಯ ವ್ಯಾಪಾರ, ವಹಿವಾಟು ಸೇರಿದಂತೆ ಕಚೇರಿಗಳು ಕೆಲಸ ನಿರ್ವಹಿಸುವುದಿಲ್ಲ.
ಈಗಾಗ್ಲೇ ನಗರದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಸ್ ಗಳು, ಖಾಸಗಿ ವಾಹನಗಳು ಸೇರಿದಂತೆ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಆಗಿದೆ. ಇಂದಿನ ಬಂದ್ ನಲ್ಲಿ 150ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿದ್ದು, ಪರ ಊರಿನಿಂದ ಬರುವವರಿಗೆ, ಹೋಗುವವರಿಗೆ ಕಷ್ಟವಾಗಲಿದೆ. ಜೊತೆಗೆ ಮನೆಯಿಂದ ಹೊರಗೆ ಬಂದರೆ ಯಾವುದೇ ರೀತಿಯ ಸೌಲಭ್ಯಗಳು ಸಿಗೋದು ಕಷ್ಟ. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
ಇನ್ನು ಬೆಂಗಳೂರು, ಮೈಸೂರು ಮೂಲಕ ಊಟಿಗೆ ತೆರಳುವ ಮಾರ್ಗವನ್ನು ಬಂದ್ ಮಾಡಲಾಗಿದೆ. ತಮಿಳುನಾಡಿಗೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆಕ್ಕನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ನಿರ್ಬಂಧಿಸಲಾಗುತ್ತಿದೆ. ಹೀಗಾಗಿ ಊಟಿಗೆ ಹೋಗುವುದನ್ನು ನಿರ್ಬಂಧಿಸಲಾಗಿದೆ.