ಬೆಂಗಳೂರು : ಮುಖ್ಯಮಂತ್ರಿಗಳ ಮೇಲೆ ಸಚಿವರ ವಿಶ್ವಾಸವಿದೆ ಅಂತಾ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಾಯಕತ್ವದಲ್ಲಿ ಮೈತ್ರಿ ಸರ್ಕಾರ ಮುಂದಿನ 4ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿದೆ ಅಂತಾ ಡಿಸಿಎಂ ಡಾ ಜಿ. ಪರಮೇಶ್ವರ ತಿಳಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅನೌಪಚಾರಿಕ ಸಚಿವ ಸಂಪುಟ ಸಭೆ ನಡೆಯಿತು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯ ಒಟ್ಟಾರೆ ಫಲಿತಾಂಶ, ರಾಜ್ಯದ ಫಲಿತಾಂಶಗಳ ಕುರಿತು ಚರ್ಚೆ ಹಾಗೂ ವಿಶ್ಲೇಷಣೆ ನಡೆಸಲಾಯಿತು. ಲೋಕಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರಕ್ಕೆ ನೀಡಿದ ಜನಾದೇಶವೇ ಹೊರತು ರಾಜ್ಯ ಸರ್ಕಾರಕ್ಕೆ ಅಲ್ಲ. ಇದು ಸಚಿವ ಸಂಪುಟದ ಒಮ್ಮತದ ಅಭಿಪ್ರಾಯವಾಗಿದೆ ಅಂತಾ ಹೇಳಿದರು.
ಫಲಿತಾಂಶದ ನಂತರ ಸರ್ಕಾರದ ಕುರಿತು ಹೇಳಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಇಂದಿನ ಸಭೆಯಲ್ಲಿ ಎಲ್ಲ ಸಚಿವರು ಮುಖ್ಯಮಂತ್ರಿಗಳಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲ ಶಾಸಕರೂ ನಿಮ್ಮ ಜೊತೆಗಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಇದಕ್ಕೆ ಸಮನ್ವಯ ಸಮಿತಿ ಅಧ್ಯಕ್ಷರೂ ಸಹ ಸಹಮತ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೀಳಿಸಲು ವಿಪಕ್ಷ ನಡೆಸುವ ಷಡ್ಯಂತ್ರಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಅವರು ತಿಳಿಸಿದರು.
ಮೈತ್ರಿ ಸರ್ಕಾರವು ಮುಂದಿನ ನಾಲ್ಕು ವರ್ಷಗಳಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲಿದೆ. ಜನತೆಗೆ ನಿರಾಶೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು.