ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಪಕ್ಷಕ್ಕೆ ದಮ್ಮು ಮತ್ತು ತಾಕತ್ ಇದ್ದರೆ ಹಿಂದಿನ ಎರಡು ಚುನಾವಣೆ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ ಎನ್ನುವ ಲೆಕ್ಕವನ್ನು ಮತದಾರರ ಮುಂದಿಡಬೇಕು.
ನಾನು ನುಡಿದಂತೆ ನಡೆದವನು. ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಮಾಡಿದ ಕೆಲಸದ ಲೆಕ್ಕವನ್ನು ಜನರ ಮುಂದೆ ಇಟ್ಟಿದ್ದೆ. ಈ ಬಾರಿಯೂ ಈ ಕೆಲಸ ಮುಂದವರಿಸುತ್ತಿದ್ದೇನೆ. ಈ ಕಾರಣಕ್ಕೆ ನರೇಂದ್ರ ಮೋದಿಯವರಲ್ಲಿ ಲೆಕ್ಕ ಕೇಳುವ ನೈತಿಕ ಅಧಿಕಾರ ನನಗಿದೆ ಎಂದು ತಿಳಿದುಕೊಂಡಿದ್ದೇನೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.