ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಕಾಂಗ್ರೆಸ್ಸಿನಲ್ಲಿ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಮುಖಂಡ ಹಾಗೂ ಹೈಕೋರ್ಟ್ ವಕೀಲ ಪಿ.ಎಚ್.ನೀರಲಕೇರಿ ಅವರು ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಪಿ.ಎಚ್.ನೀರಲಕೇರಿಯವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಹಾಗೂ ಪ್ರಧಾನಿ ಮೋದಿಯವರ ನಾಯಕತ್ವ ಮೆಚ್ಚಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಬಹಳಷ್ಟು ಖುಷಿಯಾಗಿದೆ. ಬರುವ ದಿನಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಪಡಿಸುವ ಕೆಲಸವನ್ನು ಅವರು ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಪಿ.ಎಚ್.ನೀರಲಕೇರಿ ಮಾತನಾಡಿದ, ದೇಶದಲ್ಲಿ ಶಾಂತಿ, ಸುರಕ್ಷತೆ ಹಾಗೂ ಸುಭದ್ರ ಆಡಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅನಿವಾರ್ಯವಾಗಿದೆ. ವಿಕಸಿತ ಭಾರತದ ಕನಸನ್ನು ನನಸಾಗಿಸಲು ಶ್ರಮಿಸುತ್ತಿರುವ ಪ್ರಧಾನಿ ಮೋದಿ ಪರಿವಾರಕ್ಕೆ ನಾನು ಸೇರ್ಪಡೆಯಾಗಿರುವುದು ಖುಷಿ ತಂದಿದೆ. ಸದ್ಯದಲ್ಲಿಯೇ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮತ್ತಷ್ಟು ಪ್ರಮುಖ ನಾಯಕರು ಕಾಂಗ್ರೆಸ್ ತೊರೆದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ದಾವಣಗೆರೆ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಎನ್.ರಾಜಶೇಖರ, ಲೀಗಲ್ ಸೆಲ್ ರಾಜ್ಯ ಸಮಿತಿ ಸದಸ್ಯ ಎ.ಸಿ.ರಾಘವೇಂದ್ರ, ರಾಜು ಟಿ.ಮಸವಳ್ಳಿ, ಅಂಜನ್ ಕುಮಾರ, ಸುರೇಶ ಮಸವಳ್ಳಿ ಸೇರಿದಂತೆ ಅನೇಕರಿದ್ದರು.