ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ದೇಶದ ತುಂಬಾ ಕಾಂಗ್ರೆಸ್ ಪ್ರತಿಭಟನೆ ಮುಂದುವರೆದಿದೆ. ಅದೇ ರೀತಿ ಶುಕ್ರವಾರ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾ ಮುಖಂಡರು, ಕಾರ್ಯಕರ್ತರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಅನಗತ್ಯವಾಗಿ ಸೋನಿಯಾ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ದೇಶಕ್ಕಾಗಿ ಗಾಂಧಿ ಕುಟುಂಬ ಪ್ರಾಣ ತ್ಯಾಗ ಮಾಡಿದೆ. ಇಡಿ, ಐಟಿ ಇಲಾಖೆ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನು ಜೈಲಿಗೆ ಹಾಕಿ ಕಾಂಗ್ರೆಸ್ ಮುಗಿಸುವ ಹುನ್ನಾರ ನಡೆದಿದೆ. ಆದರೆ, ಬ್ರಿಟಿಷರಿಗೆ ಹೆದರದ ಭಾರತೀಯರು ಬಿಜೆಪಿ ಬೆದರಿಕೆಗೆ ನಾವು ಬಗ್ಗುವುದಿಲ್ಲವೆಂದು ಕಿಡಿ ಕಾರಿದರು.
ಈ ವೇಳೆ ಶಾಸಕರಾದ ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಮಾಜಿ ಸಂಸದ ಪ್ರೊ.ಐ.ಜಿ ಸನದಿ, ಎನ್.ಎಚ್ ಕೋನರೆಡ್ಡಿ, ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.