ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಗುತ್ತಿಗೆದಾರ ಹಾಗೂ ಬಿಜೆಪಿ ಬೆಂಬಲಿಗನಾಗಿದ್ದ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದಕ್ಕೆ ಸಂತೋಷ ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಂದು ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ್ದು, ಈ ವೇಳೆ ಪೊಲೀಸರು ರಿಪೋರ್ಟ್ ಸಲ್ಲಿಸಿದ್ದಾರೆ. ಇದಕ್ಕೆ ಸಂತೋಷ ಪತ್ನಿ ರೇಣುಕಾ, ಸಹೋದರ ಪ್ರಶಾಂತ ಆಕ್ಷೇಪಣೆ ಸಲ್ಲಿಸಿದ್ದಾರೆ. ಪೊಲೀಸರು ಸರಿಯಾದ ಸಾಕ್ಷಿ ಸಂಗ್ರಹಿಸಿಲ್ಲ. ಮರುತನಿಖೆ ನಡೆಸಿ ಎಂದು ಕೇಳಿಕೊಂಡಿದ್ದಾರೆ. ಕೋರ್ಟ್ ಮೇ 7ಕ್ಕೆ ವಿಚಾರಣೆ ಮುಂದೂಡಿದೆ.
ಈ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೇಳಿ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಸಂತೋಷ ಪಾಟೀಲ ಡೆತ್ ನೋಟಿನಲ್ಲಿ ಕೆ.ಎಸ್ ಈಶ್ವರಪ್ಪ ಹೆಸರು ಬರೆದು, ಕಮಿಷನ್ ಸಲುವಾಗಿ ನಾನು ಮಾಡಿದ ಕೆಲಸಗಳಿಗೆ ಬಿಲ್ ಮಾಡಿಲ್ಲ. ಸಾಲ ಮಾಡಿ ಕಾಮಗಾರಿ ಮುಗಿಸಿದ್ದು, ಸಾಲಗಾರಿಗೆ ಹಣ ಕೊಡಲು ಆಗಿಲ್ಲ ಎಂದು ಹೇಳಿದ್ದು ಸಾಕಷ್ಟು ವೈರಲ್ ಆಯಿತು. ಹೀಗಾಗಿ ಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾಯಿತು.