ಪ್ರಜಾಸ್ತ್ರ ಸುದ್ದಿ
ನಾಗಮಂಗಲ: ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ 57 ವರ್ಷದ ಕುಮಾರ ಅನ್ನೋ ವ್ಯಕ್ತಿ ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪಾಂಡವಪುರ ತಾಲೂಕಿನ ಕಟ್ಟೇರಿ ಮೂಲದ ಕುಮಾರ, ಮದ್ಯಪಾನ ವ್ಯಸನಿಯಾಗಿದ್ದು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಇವನಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ತಾಲೂಕಿನ ಬಿಜಿ ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಈಗಾಗಲೇ ಎರಡ್ಮೂರು ಬಾರಿ ಬೇರೆ ಬೇರೆ ಕೋವಿಡ್ ಕೇಂದ್ರದಿಂದ ತಪ್ಪಿಸಿಕೊಂಡು ಊರು ಸೇರಿದ್ದ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿದ್ದರಂತೆ.
ಆರೋಗ್ಯವಾಗಿದ್ದ ಕುಮಾರ ಇನ್ನೆರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಬೇಕಿತ್ತು. ಭಾನುವಾರ ರಾತ್ರಿ ಕೋವಿಡ್ ವಾರ್ಡ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಬೆಳ್ಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.