ಪ್ರಜಾಸ್ತ್ರ ಸುದ್ದಿ
ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 13 ಜನರು ಗಾಯಗೊಂಡ ಘಟನೆ ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇವರೆಲ್ಲ ಆಂಧ್ರದ ನಂದ್ಯಾಲ ಜಿಲ್ಲೆಯ ವೇಲಗೋಡು ಗ್ರಾಮದವರು ಎಂದು ತಿಳಿದು ಬಂದಿದೆ.
ಮುನೀರ್(40), ನಯ್ತಮ್ ಉಲ್ಲಾ(40), ಮೀಜಾ(50) ಹಾಗೂ ಬಾಲಕರಾದ ಮದ್ದಸಿರ್(12), ಸುಮ್ಮಿ(13) ಅನ್ನೋ ಐವರು ಮೃತಪಟ್ಟಿದ್ದಾರೆ. 13 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿಯ ದರ್ಗಾದಲ್ಲಿ ನಡೆಯುತ್ತಿರುವ ಉರಸ್ ಜಾತ್ರೆಗೆ ಹೊರಟಿದ್ದರು ಎಂದು ಹೇಳಲಾಗುತ್ತಿದೆ.
ಲಾರಿ ಚಾಲಕನಿಗೆ ನಿದ್ಧೆ ಬಂದ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆ ಬಿಟ್ಟು ಪಕ್ಕದ ಕಚ್ಚಾ ರಸ್ತೆಯಲ್ಲಿ ಲಾರಿ ನಿಲ್ಲಿಸಿದ್ದಾನೆ. ಆದರೆ, ಕ್ರೂಸರ್ ಚಾಲಕ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ.