ಪ್ರಜಾಸ್ತ್ರ ಸುದ್ದಿ
ಧಾರವಾಡ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಧಾರವಾಡ ಸಹ ಒಂದು. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.
ತಮ್ಮ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. 2 ಹಾಗೂ 3ನೇ ಹಂತದ ಮುಖಂಡರನ್ನು ತುಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಹ್ಲಾದ್ ಜೋಶಿಗೆ ಟಿಕೆಟ್ ನೀಡಬಾರದು ಎಂದು ಹೇಳಿದ್ದರು. ಅವರಿಗೆ ಟಿಕೆಟ್ ನೀಡಿದ ಬಳಿಕ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿ ನಾಮಪತ್ರ ಸಲ್ಲಿಸಿದರು. ಹೀಗಾಗಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಇದೀಗ ನೋಡಿದರೆ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಾರೆ ಎಂದು ಹೇಳಲಾಗುತ್ತಿದೆ. ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕೀರ ಶಿವಯೋಗಿ ಸಿದ್ದರಾಮ ಸ್ವಾಮೀಜಿಗಳ ಸೂಚನೆ ಮೇರೆಗೆ ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ. ಮಠದ ಮೇಲೆ ನೀವು ಇಟ್ಟಿರುವ ಗೌರವಕ್ಕೆ ನಿಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ಹಿಂದಕ್ಕೆ ಪಡೆಯುತ್ತೇನೆ. ಆದರೆ, ಜೋಶಿ ವಿರುದ್ಧದ ಅಸಮಾಧಾನ ಕಡಿಮೆಯಾಗಿಲ್ಲ ಎಂದಿದ್ದಾರಂತೆ. ಅದೇನೇ ಇರಲಿ ಚುನಾವಣಾಧಿಕಾರಿಗಳಿಂದ ನಾಮಪತ್ರ ಹಿಂಪಡೆದ ಬಗ್ಗೆ ಅಧಿಕೃತ ಮಾಹಿತಿ ಹೊರ ಬಂದ ಮೇಲೆಯೇ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ.