ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಮಾತೃಪೂರ್ಣ ಯೋಜನೆ ಅಡಿಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಗರ್ಭಿಣಿಯರು ಹಾಗೂ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತೆ. ಇದರ ಟೆಂಡರ್ ನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಕೋಟ್ಯಾಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವ ಬಗ್ಗೆ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
ಇದೀಗ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತವಾಗ್ತಿದೆ. ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಪುಷ್ಪಾ ಅಮರನಾಥ ನೇತೃತ್ವದಲ್ಲಿ ನಗರದ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ, ಸಚಿವೆ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಲಾಗಿದೆ.
ಸಚಿವೆ ಶಶಿಕಲಾ ಜೊಲ್ಲೆ ಪರವಾಗಿ ಹಣ ಪಡೆಯಲು ಈ ಡೀಲ್ ನಲ್ಲಿ ಭಾಗವಹಿಸಿದ್ದ ಶಾಸಕ ಪರಣ್ಣ ಮುನವಳ್ಳಿ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಇನ್ನು ಎನ್ಎಸ್ ಯುಐ ಕಾರ್ಯಕರ್ತರು ಜೆಸಿ ನಗರದಲ್ಲಿರುವ ಸಚಿವರ ನಿವಾಸಕ್ಕೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೊಲ್ಲೆ, ಇದು ಸತ್ಯಕ್ಕೆ ದೂರವಾಗಿದ್ದು. ಇದು ರಾಜಕೀಯ ಷಡ್ಯಂತ್ರವಿದ್ದು, ನನ್ನ ತೇಜೊವಧೆ ಮಾಡುವ ಯತ್ನ ನಡೆಸಲಾಗಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಬಿಎಸ್ವೈ ಸಂಪುಟದಲ್ಲಿರುವ ಏಕೈಕ ಮಹಿಳಾ ಸಚಿವೆ ನಾನು. ರಾಜ್ಯದಲ್ಲಿ ಅಪೌಷ್ಠಿಕತೆ ಪ್ರಮಾಣ ಶೇಕಡ 0.3ರಷ್ಟು ಇತ್ತು. ನಾನು ಅಧಿಕಾರ ಸ್ವೀಕರಿಸಿದ 2 ವರ್ಷಗಳಲ್ಲಿ ಶೇಕಡ 0.1ಕ್ಕೆ ಇಳಿಸಿದ್ದೇನೆ ಎಂದಿದ್ದಾರೆ.