ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಅಬ್ಬರದಿಂದ ಕೂಡಿದೆ. ರಾಜ್ಯ, ರಾಷ್ಟ್ರೀಯ ನಾಯಕರು ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವೇಳೆ ವಿಪಕ್ಷಗಳ ವಿರುದ್ಧ ಭಾರೀ ಟೀಕಾಪ್ರಹಾರ ನಡೆಸುತ್ತಿದ್ದಾರೆ.
ಅದರಲ್ಲೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ವಿರುದ್ಧ ಅಮಿತ್ ಶಾ, ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಮುಗಿಬಿದ್ದಿದ್ದು ಅವರನ್ನು ಸೋಲಿಸಲು ಪಟ ತೊಟ್ಟಿದ್ದು ಮಾತಿನ ಬಾಣಗಳನ್ನು ಬಿಡುತ್ತಿದ್ದಾರೆ.
ಮತ್ತೊಂದು ಕಡೆ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸಿದ್ದು, ಅಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ಕಣದಲ್ಲಿದ್ದಾರೆ. ಹೀಗಾಗಿ ಇಲ್ಲಿಯೂ ಏಟು, ಎದುರೇಟು ಜೋರಾಗಿದೆ. ಇದೆ ರೀತಿ ಕನಕಪುರದಲ್ಲಿ ಕಾಂಗ್ರೆಸ್ ನಿಂದ ಡಿ.ಕೆ ಶಿವಕುಮಾರ್, ಬಿಜೆಪಿಯಿಂದ ಆರ್.ಅಶೋಕ ಮಧ್ಯ ಕದನ ನಡೆಯುತ್ತಿದೆ. ಜೊತೆಗೆ ಜೆಡಿಎಸ್ ನಾಯಕರು ಸಹ ಮಾತಿನ ಏಟು ನೀಡುತ್ತಿದ್ದಾರೆ. ಕುಮಾರಸ್ವಾಮಿಗೆ ಕಣ್ಣೀರು ಹಾಕಿಸಿದವರ ಕಣ್ಣಲ್ಲಿ ನೀರು ಹಾಕಿಸಿ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಸೇರಿ ಅನೇಕ ನಾಯಕರು ರಾಜ್ಯಾದ್ಯಂತ ಪ್ರಚಾರ ನಡೆಸಿದ್ದು, ಗೆಲುವಿಗಾಗಿ ತಂತ್ರಗಳನ್ನು ಮಾಡುತ್ತಿದ್ದಾರೆ.