ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆ ಸಂಬಂಧ ಜೆಡಿಎಸ್ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈಗ ಮತ್ತೆ ಹೆಚ್ಡಿಕೆ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬರೆದಿರುವ ಕುಮಾರಸ್ವಾಮಿ, ಸನ್ಮಾನ್ಯ ಸಿದ್ದರಾಮಯ್ಯನವರೆ ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ಸರಳರಾಮಯ್ಯ ಒಳಗೆ ಐಶಾರಾಮಯ್ಯ. ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ. ಗ್ಯಾರೆಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಎಂದು ಬರೆದಿದ್ದಾರೆ.
ಗ್ಯಾರೆಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಹೇಳಿದ್ದೇನೆ. ಇದು ಮಹಾಪಾಪವೇ? ಹಳ್ಳಿಗಳಿಗೆ ಹೋಗಿದ್ದೇನೆ, ಅಲ್ಲಿ ಫಲಾನುಭವಿಗಳೊಂದಿಗೆ ಮಾತನಾಡಿದ್ದೇನೆ. ಬನ್ನಿ ನಿಮಗೂ ಸತ್ಯ ದರ್ಶನ ಮಾಡಿಸುತ್ತೇನೆ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದಿಲ್ಲ. ನನ್ನ ದನಿ ಬಡವರ ಪರ. ಬಹಿರಂಗ ಚರ್ಚೆಗೆ ಬರಲು ಸಿದ್ಧವೆಂದು ಸವಾಲು ಹಾಕಿದ್ದಾರೆ.