ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತರ ಮಹಾಸಭಾ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಿಂದೂ ಧರ್ಮದವರಲ್ಲ. ಅವರು ಲಿಂಗಾಯತ ಧರ್ಮಕ್ಕೆ ಸೇರಿದವರು ಎಂದು ಹೇಳಲಾಗಿದೆ.
ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಗುರುವಾರ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ, ಹಿಂದೂ ಧರ್ಮ ಹಾಗೂ ಲಿಂಗಾಯತ ಧರ್ಮದ ಆಚರಣೆಯಲ್ಲಿ ವ್ಯತ್ಯಾಸಗಳಿವೆ. ಲಿಂಗಾಯತರು ಹಿಂದೂ ಧರ್ಮಕ್ಕೆ ಸೇರಿಲ್ಲ. ಕಾಂಗ್ರೆಸ್ ನ ಎಂ.ಬಿ ಪಾಟೀಲ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಬೇಕು ಎಂದಿರುವುದು ಸರಿಯಾಗಿದೆ ಎಂದಿದ್ದಾರೆ.
ಈ ಮಾತು ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಯಡಿಯೂರಪ್ಪ ಲಿಂಗಾಯತ ಸಮಾಜದ ನಾಯಕರಾಗಿದ್ದರೂ, ಬಿಜೆಪಿ ಪ್ರತಿಪಾದಿಸುವ ಹಿಂದೂ ಧರ್ಮದ ತತ್ವ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿರುವವರು. ಆರ್ ಎಸ್ಎಸ್ ನಲ್ಲಿ ತೊಡಗಿಸಿಕೊಂಡವರು. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಕೂಗು ಎದ್ದಾಗ ಅದರ ಪರವಾಗಿ ಧ್ವನಿ ಎತ್ತದವರು. ಈಗ ಅಖಿಲ ಭಾರತ ವೀರಶೈವ ಲಿಂಗಾಯತರ ಮಹಾಸಭಾ, ಯಡಿಯೂರಪ್ಪ ಹಿಂದೂ ಧರ್ಮದವರಲ್ಲ ಎಂದಿದೆ. ಇದಕ್ಕೆ ಅವರ ಪ್ರತಿಕ್ರಿಯೆ ಏನು ಅನ್ನೋದು ಕಾದು ನೋಡಬೇಕಿದೆ.