ಪ್ರಜಾಸ್ತ್ರ ಸುದ್ದಿ
ಉಡುಪಿ: ಅತಿಯಾದ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾದ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬುಧವಾರ ಭೇಟಿ ನೀಡಿದರು. ಉಡುಪಿಯಲ್ಲಿ ಜಿಲ್ಲಾ ಮಟ್ಟದ ಪರಿಶೀಲನ ಸಭೆ ನಡೆಸಿದರು.
ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮಳೆಯಿಂದ ಹಾನಿಯಾದ ಮೂಲಸೌಕರ್ಯಕ್ಕಾಗಿ ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದರು. ಲೋಕೋಪಯೋಗಿ ಇಲಾಖೆ, ವಿದ್ಯುತ್, ಸೇತುವೆ, ಆರ್.ಡಿ.ಪಿ ಆರ್ ವ್ಯಾಪ್ತಿಗೆ ಬರುವ ಮೂಲಸೌಕರ್ಯಗಳ ದುರಸ್ತಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದರು.
ಆಗಸ್ಟ್ ನಲ್ಲಿ ಮತ್ತೆ ಪರಿಶೀಲನೆ ಮಾಡಿ ಅಗತ್ಯತೆಗೆ ಅನುಸಾರವಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್ ಗೆ 1,600 ಕೋಟಿ ರೂಪಾಯಿ ರೈತರಿಗೆ ಪರಿಹಾರ ಒಂದು ತಿಂಗಳಲ್ಲಿ ಬಿಡುಗಡೆ ಮಾಡಲಾಯಿತು. ಈ ವರ್ಷ ಸಹ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು. ಮುಂದಿನ ವಾರ ಕಾರವಾರ, ಬೆಳಗಾವಿ, ಉತ್ತರ ಕರ್ನಾಟಕದ ಜಿಲ್ಲೆಗಳ ಪ್ರವಾಸ ಮಾಡಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.