ಪ್ರಜಾಸ್ತ್ರ ಸುದ್ದಿ
ನವದೆಹಲಿ: ಹಿರಿಯ ವಕೀಲರು ಹಾಗೂ ಕೇಂದ್ರದ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್(97) ಅವರು ಬುಧವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ. 1975ರ ಸಂದರ್ಭದಲ್ಲಿ ಚುನಾವಣೆಯ ದುರುಪಯೋಗ ಕಾರಣಕ್ಕೆ ಪ್ರಧಾನಿ ಇಂದಿರಾ ಗಾಂಧಿ ಅವರ ಸರ್ಕಾರ ರದ್ದುಗೊಳಿಸಿದ ಪ್ರಕರಣದಲ್ಲಿ ವಾದ ಮಾಡಿ ಐತಿಹಾಸಿಕ ಗೆಲುವು ಸಾಧಿಸಿದ್ದರು. ಅಂದು ರಾಜಕಾರಣಿ ರಾಜ ನಾರಾಯಣ್ ಪರ ವಾದಿಸಿದ್ದರು.
ಈ ಪ್ರಕರಣದಿಂದಾಗಿ ಅಲಹಬಾದ್ ಹೈಕೋರ್ಟ್ ಇಂದಿರಾ ಗಾಂಧಿಯನ್ನು 6 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆದೇಶ ನೀಡಿತ್ತು. 1971ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ ನಾರಾಯಣ್ ಸ್ಪರ್ಧಿಸಿದ್ದರು. ಮುಂದೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೋರ್ಟ್ ಮೆಟ್ಟಿಲು ಹತ್ತಿದ್ದರು. ನಂತರ ಇಂದಿರಾ ಗಾಂಧಿ ಸುಪ್ರೀಂ ಕೋರ್ಟಿಗೆ ಹೋದರು.
ಇಂತಹ ಶಾಂತಿ ಭೂಷಣ್ ಮುಂದೆ ಮೂರಾರ್ಜಿ ದೇಸಾಯಿ ಸರ್ಕಾರದಲ್ಲಿ ಕಾನೂನು ಸಚಿವರಾದರು. ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇವರ ಮಕ್ಕಳಾದ ಜಯಂತ್ ಹಾಗೂ ಪ್ರಶಾಂತ್ ಭೂಷಣ್ ಸಹ ವಕೀಲ ವೃತ್ತಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.