ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ನಾಡಿನ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿ, ಮಲೆನಾಡು, ಬಯಲಿಸೀಮೆ ಸೇರಿದಂತೆ 13 ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ. 17 ತಾಲೂಕುಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ.
ಜೂನ್ 1ರಿಂದ ಇದುವರೆಗೂ 12 ಜನರು ಮೃತಪಟ್ಟಿದ್ದಾರೆ. 65 ಜಾನುವಾರುಗಳ ಜೀವಹಾನಿಯಾಗಿದೆ. ಇನ್ನು ಕರ್ನಾಟಕದ ಬಹುತೇಕ ಡ್ಯಾಂಗಳು ತುಂಬಿವೆ. ಹೀಗಾಗಿ ನೀರನ್ನು ಹೊರ ಬಿಡುವ ಕೆಲಸ ಮಾಡಲಾಗುತ್ತಿದೆ. ಹೆಚ್ಚು ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ರಕ್ಷಣೆ ಹಾಗೂ ಪರಿಹಾರ ಕಾರ್ಯಗಳ ಸಂಬಂಧ ಪ್ರತಿಯೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಹತ್ತಿರ 735.59 ಕೋಟಿ ರೂಪಾಯಿ ಇದೆ. ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಜನರ ರಕ್ಷಣೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ. ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದರೆ 10 ಸಾವಿರ ರೂಪಾಯಿ ತುರ್ತು ಪರಿಹಾರ ನೀಡಲು ಸೂಚಿಸಿದ್ದಾರೆ. ಜೂನ್ 1ರಿಂದ ಇದುವರೆಗೆ ಮಳೆಯಿಂದಾದ ಹಾನಿಯ ವಿವರ ಹೀಗಿದೆ.
13 ಜಿಲ್ಲೆ, 17 ತಾಲೂಕು, 37 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ.
495 ಜನರು ಸಮಸ್ಯೆಗಳನ್ನು ಎದುರಿಸಿದ್ದಾರೆ.
90 ಜನರನ್ನು ರಕ್ಷಿಸಲಾಗಿದೆ.
ರಾಜ್ಯದ ವಿವಿಧ ಕಡೆ 4 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.
12 ಜನರು ಪ್ರಾಣ ಕಳೆದುಕೊಂಡಿದ್ದಾರೆ. 65 ಜಾನುವಾರಗಳು ಮೃತಪಟ್ಟಿವೆ.