ಪ್ರಜಾಸ್ತ್ರ ಸುದ್ದಿ
ವಿಜಯಪುರ: ಗುಮ್ಮಟನಗರಿಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭರ್ಜರಿಯಾಗಿ ಮಳೆಯಾಗ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಹರಿಯುವ ನದಿಗಳು ಭರ್ತಿಯಾಗಿದ್ದು, ಅಪಾಯದ ಮುನ್ಸೂಚನೆ ಸೂಚಿಸುತ್ತಿವೆ. ಇದ್ರಿಂದಾಗಿ ಜಿಲ್ಲಾಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ.
ಯಾವುದೇ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ್ರೂ, ಅದನ್ನ ಎದುರಿಸುವ ನಿಟ್ಟಿನಲ್ಲಿ ಸಕಲ ರೀತಿಯಿಂದ ಸಜ್ಜಾಗಿರುವಂತೆ ಸೂಚಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ನೇಮಿಸಲಾದ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಅಗ್ನಿಶಾಮಕ ಇಲಾಖೆ 24X7 ರಕ್ಷಣಾ ಸಾಮಾಗ್ರಿಗಳೊಂದಿಗೆ ಸಜ್ಜಾಗಿರಬೇಕು. ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಮ್ ತೆಗೆದು ರಜೆ ದಿನಗಳು ಸೇರಿದಂತೆ ದಿನದ 24 ಗಂಟೆಯೂ ಸಿಬ್ಬಂದಿ ನೇಮಿಸಬೇಕು. ಪ್ರತಿದಿನ ಬೆಳಗ್ಗೆ ಜಿಲ್ಲಾ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವುದು. ಇನ್ನು ಪ್ರವಾಹದಿಂದ ಮನೆ ಹಾನಿ, ಜೀವ ಹಾನಿ, ಜಾನುವಾರುಗಳ ಹಾನಿ ಸೇರಿದಂತೆ ಬೆಳೆ ಹಾನಿ ಬಗ್ಗೆ ಪ್ರತಿ ದಿನ ತಪ್ಪದೆ ವರದಿ ನೀಡುವಂತೆ ಸೂಚಿಸಲಾಗಿದೆ.