ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ. ಇದು ಇದೀಗ ಮತ್ತೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಕ್ಸ್ ನಲ್ಲಿ ಬರೆದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಅವರಿಂದ ಇಂತಹ ಹೇಳಿಕೆ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಠ ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳನ್ನಾದರೂ ರಾಜಕೀಯದಿಂದ ದೂರ ಇಡುವ ಕೆಲಸ ಸರ್ಕಾರ ಮಾಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೆಹಲಿಯಲ್ಲಿ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ. ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸುವ ಸಮವಸ್ತ್ರ ಇರಬೇಕು ಎನ್ನುವ ನಿಯಮವಿತ್ತು. ಈಗ ಸಿದ್ದರಾಮಯ್ಯನವರು ಯೂನಿಫಾರಂಗೂ ಹಿಜಾಬ್ ಕಡ್ಡಾಯ ಮಾಡಲು ಹೊರಟಿದ್ದಾರೋ ಅಥವ ಅವರಿಷ್ಟದಂತೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಕಿಡಿ ಕಾರಿದ್ದಾರೆ.