ಪ್ರಜಾಸ್ತ್ರ ಸುದ್ದಿ
ಸಿಂದಗಿ: ಮೇಲಾಧಿಕಾರಿಗಳ ಕಿರುಕುಳದಿಂದ ತಾಲೂಕಿನ ಸಾಸಾಬಾಳ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ನಾಯಕಲ್, ಭಾನುವಾರ ರಾತ್ರಿ ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಸೋಮವಾರ ಮಧ್ಯಾಹ್ನ ಬೃಹತ್ ಪ್ರತಿಭಟನೆ ಮಾಡಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಲಾಗಿತ್ತು.
ಇದೀಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಐವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ ಹರನಾಳ ಹಾಗೂ ಎಸ್.ಎಲ್ ಭಜಂತ್ರಿ ಎಂಬುವವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಶಾಲೆಯ ಹಿಂದಿನ ಮುಖ್ಯ ಶಿಕ್ಷಕ, ಸಿಆರ್ ಸಿ ಜಿ.ಎನ್ ಪಾಟೀಲ, ಬಿ.ಎಂ ತಳವಾರ ಹಾಗೂ ಸಂಗಮೇಶ ಚಿಂಚೋಳಿ ಎಂಬುವರ ಬಂಧನಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಪ್ರಕರಣ ಸಂಬಂಧ ಮೂವರನ್ನು ಅಮಾನತು ಮಾಡಲಾಗಿದೆ. ಬಿಇಒ ಮೇಲೆ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಕ್ರಮ ತೆಗೆದುಕೊಳ್ಳುವ ಅಧಿಕಾರವಿದ್ದು, ಅವರಿಗೂ ಪತ್ರ ಬರೆಯಲಾಗಿದೆ. ಬಸವರಾಜ ನಾಯಕಲ್ ಆತ್ಮಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಕಾನೂನು ಶಿಕ್ಷೆ ವಿಧಿಸಿ ನ್ಯಾಯ ಕೊಡಿಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.