ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಧ್ಯ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆಯಲ್ಲಿರುವುದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವಿನ ಜಗಳ. ಶಾಸಕರೊಂದಿಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಂಧಾನಕ್ಕೆ ಹೋಗಿದ್ದಾರೆ ಅನ್ನೋ ವಿಚಾರದಿಂದ ಶುರುವಾದ ಜಗಳ ಬೇರೆ ಬೇರೆ ಹಂತಕ್ಕೆ ಹೋಗಿದೆ.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಸಹ ಐಪಿಎಸ್ ಅಧಿಕಾರಿ ಡಿ.ರೂಪಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ವೈರಲ್ ಆಗಿವೆ. ಹೀಗಾಗಿ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳ ಬೀದಿ ರಂಪಾಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ನೋಟಿಸ್ ನೀಡಲಾಗಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವೈಯಕ್ತಿಕವಾಗಿ ಅವರಿಬ್ಬರಿಗೂ ಭಿನ್ನಾಭಿಪ್ರಾಯಗಳಿದ್ದರೆ ಏನಾದರೂ ಮಾಡಿಕೊಳ್ಳಲಿ. ಅಥವ ಅದನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕಿತ್ತು. ಅದನ್ನು ಬಿಟ್ಟು ಹೀಗೆ ಸಾರ್ವಜನಿಕವಾಗಿ ಕಿತ್ತಾಡಿಕೊಂಡರೆ ಸರ್ಕಾರ ನೋಡಿಕೊಂಡು ಸುಮ್ಮನೆ ಕೂರಲ್ಲ. ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೊದಲು ನೋಟಿಸ್ ನೀಡುತ್ತೇವೆ. ಅದರಿಂದ ಅವರಿ ಸರಿಪಡಿಸಿಕೊಂಡರೆ ಸರಿ. ಜಗಳ ಮುಂದುವರೆದೆ ಮುಂದಿನ ಕಾನೂನು ಕ್ರಮ ಏನು ಇದೆಯೋ ಅದನ್ನು ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ.