ಪ್ರಜಾಸ್ತ್ರ ಸುದ್ದಿ
ನವದೆಹಲಿ: ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ವಿಪಕ್ಷಗಳ ಮೇಲೆ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ ಎಂದು ಹೇಳಿ ವಿಪಕ್ಷಗಳು ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದವು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮ್ಯಾಚ್ ಫಿಕ್ಸಿಂಗ್ ಮಾಡಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಯಶಸ್ವಿಯಾದರೆ ಸಂವಿಧಾನ ಬದಲಾಯಿಸಲಾಗುತ್ತೆ. ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತೆ ಎಂದು ವಾಗ್ದಾಳಿ ನಡೆಸಿದರು.
ಇದು ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ಚುನಾವಣೆಯಾಗಿದೆ. ಕ್ರಿಕೆಟ್ ನಲ್ಲಿ ಅಂಪೈರ್ ಗಳು ನಾಯಕನ ಮೇಲೆ ಒತ್ತಡ ಹೇರಿ ಆಟಗಾರರನ್ನು ಖರೀದಿಸಿ ಪಂದ್ಯ ಗೆದ್ದರೆ ಮ್ಯಾಚ್ ಫಿಕ್ಸಿಂಗ್ ಎನ್ನುತ್ತಾರೆ. ಈಗ ನಮ್ಮ ಮುಂದೆ ಲೋಕಸಭಾ ಚುನಾವಣೆ ಇದೆ. ಪಂದ್ಯ ಆರಂಭವಾಗುವ ಮೊದಲೇ ಇಬ್ಬರು ಆಟಗಾರರನ್ನು ಬಂಧಿಸಲಾಗಿದೆ. ಬಿಜೆಪಿ 400 ಸ್ಥಾನ ಗೆಲ್ಲುವ ಘೋಷಣೆ ಕೂಗುತ್ತಿದೆ. ಇವಿಎಂ ಮ್ಯಾಚ್ ಫಿಕ್ಸಿಂಗ್, ವಿರೋಧ ಪಕ್ಷಗಳ ಮೇಲೆ ಒತ್ತಡ, ಮಾಧ್ಯಮಗಳನ್ನು ಖರೀದಿಸದಿದ್ದರೆ 180 ಸ್ಥಾನಗಳನ್ನು ಸಹ ದಾಟುವುದಿಲ್ಲ ಎಂದರು.