ನವದೆಹಲಿ: ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ, ರಾಜ್ಯ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಇರಲು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಕೈಕೊಟ್ಟ ಪರಿಣಾಮ ದೋಸ್ತಿ ಸರ್ಕಾರ ಪತನಗೊಂಡಿತು. ಇದರಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚು. ಇದೀಗ ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಇದು ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಕಾರಣ, ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿದ್ದು ಹೆಚ್ಚು ಸ್ಥಾನಗಳನ್ನ ಗೆಲ್ಲಲು ಎಲ್ಲರು ಸೇರಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ.
ಗುರುವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಪ್ರವಾಹ ಪರಿಸ್ಥಿತಿ ಹಾಗೂ ಉಪ ಚುನಾವಣೆ ಕುರಿತು ಮಾತಕತೆ ನಡೆದಿದೆ. ರಾಜ್ಯ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಇರುವ ಮೂಲಕ, ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣರು ಸೇರಿದಂತೆ ಪ್ರಮುಖ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.