ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಿಎಂ, ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ, 2023ರ ವಿಧಾನಸಭಾ ಚುನಾವಣೆ ಸಂಬಂಧ ಕ್ಷೇತ್ರ ಹುಡುಕಾಟದ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋದರ ಬಗ್ಗೆ ಸ್ಪಷ್ಟತೆಯಿಲ್ಲ. ಆದರೆ, ಬೆಂಬಲಿಗರು, ಅಭಿಮಾನಿಗಳು ತಮ್ಮ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಒತ್ತಡ ಹೇರುತ್ತಿದ್ದಾರೆ.
ಇಂದು ನಗರದಲ್ಲಿರುವ ಸರ್ಕಾರಿ ನಿವಾಸದ ಎದುರು ಕೋಲಾರದ ಬೆಂಬಲಿಗರು, ಕಾರ್ಯಕರ್ತರು, ಅಭಿಮಾನಿಗಳು ಜಮಾಯಿಸಿ, ಕೋಲಾರದಿಂದ ಸ್ಪರ್ಧಿಸಬೇಕು ಎಂದು ಘೋಷಣೆ ಕೂಗಿದ್ದಾರೆ. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ನೀವು ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಅನ್ನೋ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಗೊಂದಲಕ್ಕೆ ಸಿಲುಕಿದ್ದಾರೆ.
ಕೆಲವು ದಿನಗಳ ಹಿಂದೆ ಬದಾಮಿ ಕ್ಷೇತ್ರದ ಬೆಂಬಲಿಗರು ಮತ್ತೊಮ್ಮೆ ಬದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದರು. ಅವರು ಸಹ ಬೆಂಗಳೂರಿಗೆ ತೆರಳಿ ಒತ್ತಡ ಹೇರಿದ್ದರು. ಹೀಗೆ ಇತರೆ ಕ್ಷೇತ್ರಗಳಿಂದಲೂ ಸ್ಪರ್ಧಿಸಬೇಕು ಅನ್ನೋ ಬೇಡಿಕೆ ಇಡಲಾಗುತ್ತಿದೆ. ಇದರಿಂದಾಗಿ ಸ್ವತಃ ಸಿದ್ದರಾಮಯ್ಯನವರಿಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುವುದು ತಿಳಿಯದೆ ಗೊಂದಲಕ್ಕೆ ಒಳಗಾಗಿದ್ದಾರೆ.