ಚಿಂಚೋಳಿ, ಕುಂದಗೋಳ: ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಈಗಾಗ್ಲೇ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ದಂಡು ಬೀಡು ಬಿಟ್ಟಿದೆ. ಹೇಗಾದ್ರೂ ಮಾಡಿ ಈ ಎರಡು ಕ್ಷೇತ್ರಗಳನ್ನು ಗೆಲ್ಲಬೇಕು ಅನ್ನೋದು ನಾಯಕರ ಲೆಕ್ಕಾಚಾರ. ಹೀಗಾಗಿ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಬೃಹತ್ ಸಮಾವೇಶಗಳನ್ನು ಆಯೋಜನೆ ಮಾಡಲಾಗಿದೆ. ಈ ಮೂಲಕ ಮತದಾರರನ್ನು ಸೆಳೆಯುವ ಎಲ್ಲ ರೀತಿಯ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿವೆ.
ಕಲಬುರಗಿಯ ಚಿಂಚೋಳಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಬೃಹತ್ ಸಮಾವೇಶ ಆಯೋಜನೆ ಮಾಡಿದೆ. ಇದರಲ್ಲಿ ಬಿಜೆಪಿ ಮುಖಂಡರಾದ ಮಾಲಿಕಯ್ಯ ಗುತ್ತೇದಾರ್, ಅರವಿಂದ್ ಲಿಂಬಾವಳಿ, ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಸಹ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಿಜೆಪಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ.
ಶಿವಳ್ಳಿ ನಿಧನದಿಂದಾಗಿ ಕುಂದಗೋಳ ಹಾಗೂ ಜಾಧವ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಕಾರಣಕ್ಕೆ ಚಿಂಚೊಳಿಯಲ್ಲಿ ಉಪಚುನಾವಣೆ ನಡೆಯುತ್ತಿದೆ. ಇಲ್ಲಿನ ಫಲಿತಾಂಶ ರಾಜ್ಯ ಮೈತ್ರಿ ಸರ್ಕಾರದ ಮೇಲೂ ಪರಿಣಾಮ ಬೀರಬಹುದಾದ ಸಾಧ್ಯತೆ ಇರುವ ಕಾರಣ, ಬಿಜೆಪಿ ಮತ್ತು ಕಾಂಗ್ರೆಸ್ ಗೆಲುವಿಗಾಗಿ ಎಲ್ಲ ತಯಾರಿ ಮಾಡಿಕೊಳ್ಳುತ್ತಿವೆ. ಮೇ 19ಕ್ಕೆ ಈ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.