ಮಂಡ್ಯ: ಮೇ 31ರ ತನಕ ಲಾಕ್ ಡೌನ್ ಮುಂದುವರೆಸಲಾಗಿದೆ. ಹೀಗಾಗಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನ ಮಾಡಬಾರದು ಎಂದು ಆದೇಶಿಸಲಾಗಿದೆ. ಆದ್ರೆ, ಮಂಡ್ಯ ಜಿಲ್ಲೆ ಕಿಕ್ಕೇರಿ ಹೋಬಳಿ ವ್ಯಾಪ್ತಿಯ ಚುಜ್ಜಲಕ್ಯಾನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ದೇವರ ಮೆರವಣಿಗೆ ನಡೆದಿದೆ.
ಚುಜ್ಜಲಕ್ಯಾತನಹಳ್ಳಿ ಗ್ರಾಮದಲ್ಲಿರುವ ಬಸವೇಶ್ವರಸ್ವಾಮಿ ದೇವಸ್ಥಾನ, ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಹೀಗಿರುವಾಗ ಇಂದು ಯಾವುದೇ ಅನುಮತಿ ಪಡೆಯದೇ ದೇವರಿಗೆ ವಿಶೇಷ ಪೂಜೆ ಮತ್ತು ಉತ್ಸವವನ್ನ ನಡೆಸಲಾಗಿದೆ. ಮಂಡ್ಯದಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮುಂಬೈನಿಂದ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾಗ ನಿರ್ಬಂಧದ ನಡುವೆಯೂ ಮೆರವಣಿಗೆ ಮಾಡಲಾಗಿದೆ.
ಕರೋನಾ ಲಾಕ್ ಡೌನ್ ನಿಯಮಗಳನ್ನ ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಯವುದೇ ಕರೋನಾ ಸುರಕ್ಷತಾ ನಿಯಮಗಳನ್ನು ಅನುಸರಿಸದೇ ಸುಮಾರು 60ಕ್ಕೂ ಹೆಚ್ಚು ಮಂದಿ ಒಂದೆಡೆ ಸೇರಿ, ದೇವಸ್ಥಾನದಲ್ಲಿ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂಜಾ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನ ಸುಮಾರು 4ಗಂಟೆಗಳ ಕಾಲ ನಡೆಸಲಾಗಿದೆ. ಹೀಗಾಗಿ ಕಾರ್ಯಕ್ರಮ ಆಯೋಜಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರ ಅವರು ಏನು ಕ್ರಮ ತೆಗೆದುಕೊಳ್ತಾರೋ ನೋಡಬೇಕು.