ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾತ್ರೆ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ, ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಸೋಮವಾರದ ಜಾನುವಾರು ಜಾತ್ರೆ ಭರ್ಜರಿಯಾಗಿ ನಡೆದಿದೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ತಾಲೂಕಿನಾದ್ಯಂತ ಸೆಪ್ಟೆಂಬರ್ 20, 2023ರಿಂದ ಅಕ್ಟೋಬರ್ 23, 2023ರ ತನಕ ಜಾನುವಾರು(ಕುರಿ, ಮೇಕೆ ಹೊರತುಪಡಿಸಿ) ಸಂತೆ, ಜಾತ್ರೆ, ಸಾಗಾಣಿಕೆಗೆ ನಿಷೇಧ ಹೇರಿ ಸೂಚನೆ ಹೊರಡಿಸಿದ್ದಾರೆ. ಇದಕ್ಕೆ ಕ್ಯಾರೆ ಎನ್ನದೆ ಇಂದು ಜಾನುವಾರು ಸಂತೆ ನಡೆದಿದೆ. ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ನಿರ್ಲಕ್ಷ ಎಂದು ಸ್ಥಳೀಯರು ಅಸಮಾಧಾನ ಹೊರ ಹಾಕುತ್ತಿದ್ದಾರೆ.