ಪ್ರಜಾಸ್ತ್ರ ಸುದ್ದಿ
ನವದೆಹಲಿ: ಜೆಡಿಎಸ್ ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಟಿಕೆಟ್ ಅಂತಿಮವಾಗಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಕ್ಷೇತ್ರ ಹಂಚಿಕೆ ಕುರಿತು ಚರ್ಚೆ ನಡೆಸುತ್ತಿದೆ. ಮಂಡ್ಯದಲ್ಲಿ ಹೇಗಾದರೂ ಮಾಡಿ ಗೆಲುವು ಸಾಧಿಸುವ ಮೂಲಕ ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಳ್ಳಬೇಕು ಅನ್ನೋದು ಕುಮಾರಸ್ವಾಮಿ ಲೆಕ್ಕಾಚಾರ. ಆದರೆ, ಸಂಸದೆ ಸುಮಲತಾ ಅಂಬರೀಶ್ ಸಹ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ತಮಗೆ ಟಿಕೆಟ್ ಫಿಕ್ಸ್ ಅನ್ನೋದು ಅವರ ಮಾತು. ಈಗ ನೋಡಿದರೆ ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, ಕೋಲಾರದಿಂದ ನಿಸರ್ಗ ನಾರಾಯಣಸ್ವಾಮಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರಂತೆ. ಆದರೆ, ಇಲ್ಲಿರುವುದು ಮಂಡ್ಯ ಕ್ಷೇತ್ರದ ಟೆನ್ಷನ್. ನಾನು ಮಂಡ್ಯ ಬಿಟ್ಟು ಬೇರೆಲ್ಲೂ ಹೋಗಲ್ಲ ಎಂದು ಸಂಸದೆ ಸುಮಲತಾ ಹೇಳುತ್ತಿದ್ದಾರೆ. ನನ್ನ ಕೆಲಸ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ ಸಹ ಬೆಂಬಲ ಸೂಚಿಸಿದ್ದಾರೆ. ನಾನು ಸ್ಪರ್ಧಿಸುವುದಾರೆ ಮಂಡ್ಯದಿಂದ ಎಂದಿದ್ದಾರೆ.
ಒಂದು ವೇಳೆ ಡಾ.ಮಂಜುನಾಥ್ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದರೆ ಸುಮಲತಾ ಮತ್ತೆ ಪಕ್ಷೇತರರಾಗಿ ಸ್ಪರ್ಧಿಸುತ್ತಾರ ಎನ್ನುವ ಪ್ರಶ್ನೆ ಎದ್ದಿದೆ. ಹೀಗೆನಾದರೂ ಆದರೆ ಸುಮಲತಾಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತಾ ಅಥವ ತನ್ನ ಅಭ್ಯರ್ಥಿಯನ್ನು ಹಾಕುತ್ತಾ ಎನ್ನುವ ಕುತೂಹಲ ಸಹ ಇದೆ. ಒಟ್ಟಿನಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬಳಿಕ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ.