ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಒಂದು ವಾರಗಳ ಕಾಲ ದೇಶವ್ಯಾಪಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಬಗ್ಗೆ ಶನಿವಾರ ತಿಳಿಸಿದ್ದು, ಮೆಹಂಗೈ ಮುಕ್ತ ಭಾರತ್ ಅಭಿಯಾನವನ್ನು ಮಾರ್ಚ್ 31ರಿಂದ ಏಪ್ರಿಲ್ 7ರ ತನಕ ನಡೆಸಲಾಗುತ್ತಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದು, ಮಾರ್ಚ್ 31ರಂದು ಕಾಂಗ್ರೆಸ್ ಕಾರ್ಯಕರ್ತರು, ಸ್ಥಳೀಯರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಏಪ್ರಿಲ್ 2-4ರ ತನಕ ಕಾಂಗ್ರೆಸ್, ಎನ್ ಜಿಒ, ಧಾರ್ಮಿಕ, ಸಾಮಾಜಿಕ ಸಂಸ್ಥೆಗಳು ಮತ್ತು ಇತರರು ಪ್ರತಿಭಟನೆ ನಡೆಸಲಿದ್ದಾರೆ.
ಏಪ್ರಿಲ್ 7ರಂದು ಮತ್ತಷ್ಟು ವಿಭಿನ್ನವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆಯನ್ನು ಚುನಾವಣೆ ಹಿನ್ನೆಲೆಯಲ್ಲಿ 137 ದಿನ ಏರಿಕೆ ಮಾಡಿಲ್ಲ. ಚುನಾವಣೆ ಮುಗಿದ ಮೇಲೆ ಬೆಲೆ ಏರಿಕೆ ಮಾಡಿಕೊಂಡು ಬರಲಾಗುತ್ತಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.