ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಕುಂದಾನಗರಿಯ ಪಾಲು ಹೆಚ್ಚಿದೆ ಹಾಗೂ ಇದು ತುಂಬಾ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಒಂದು ಟೈಂನಲ್ಲಿ ಸ್ವಪಕ್ಷದ ಸಹೋದ್ಯೋಗಿಗಳು ಆಗಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ನಡುವೆ ಫೈಟ್ ನಡೆಯುತ್ತಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸೋಲಿಸಲು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದು, ವಾರದಲ್ಲಿ ಎರಡ್ಮೂರು ದಿನ ಕ್ಷೇತ್ರ ಸಂಚಾರ ನಡೆಸಿದ್ದಾರೆ.
ಮರಾಠ ನಾಯಕರೊಂದಿಗೆ ನಿರಂತರ ಸಂಪರ್ಕ ಸಾಧಿಸುತ್ತಿದ್ದಾರೆ. ಸಾಂಬ್ರಾ ಜಿಲ್ಲಾ ಪಂಚಾಯತ್ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಹಿಂಡಲಗಾ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರನ್ನು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಅವರನ್ನು ಭೇಟಿ ಮಾಡಿಸಿದ್ದು ಕುತೂಹಲ ಮೂಡಿಸಿದೆ.
ಮಾಜಿ ಸಚಿವ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆಗಿನ ಗುದ್ದಾಟದಿಂದಾಗಿ ಮೈತ್ರಿ ಸರ್ಕಾರಕ್ಕೆ ಅಂತ್ಯ ಹಾಡಿದ ರಮೇಶ್ ಜಾರಕಿಹೊಳಿ ಡಿಕೆಶಿ ಆಪ್ತರಲ್ಲಿ ಗುರುತಿಸಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಸಜ್ಜಾಗುತ್ತಿರುವುದು ಜಿಲ್ಲಾ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.