ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಠದ ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ. ಮುಕ್ತವಾಗಿ ಕಾರ್ಯನಿರ್ವಹಿಸಲು ಪೊಲೀಸರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಆದರೆ, ಶ್ರೀಗಳ ಬಂಧನ ಹಾಗೂ ಪ್ರಕರಣದ ಬಗ್ಗೆ ಯಾವುದೇ ವ್ಯಾಖ್ಯಾನ ನೀಡುವುದು ಸರಿಯಲ್ಲ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆಗಬಾರದಿತ್ತು. ಆಗಿದೆ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ ಎಂದರು.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಚಿತ್ರದುರ್ಗದ ಮುರುಘಾಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೆ, ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದಿದ್ದಾರೆ.