ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ವತಿಯಿಂದ ಸೋಮವಾರ ‘ನಾ ನಾಯಕಿ’ ಅನ್ನೋ ಮಹಿಳಾ ಸಮಾವೇಶವನ್ನು ಭರ್ಜರಿಯಾಗಿ ನಡೆಸಲಾಯಿತು. ಇದಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿದ್ದರು. ಈ ವೇಳೆ ಮಾತನಾಡಿದ ನಾಯಕಿ, ನಾಯಕರು ಮಹಿಳೆಯರಿಗೆ ಭರಪೂರ ಭರವಸೆ ನೀಡುವ ಮೂಲಕ 2023ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಶಕ್ತಿ ತುಂಬಬೇಕು ಎಂದರು.
ಮಹಿಳಾ ಸಮಾವೇಶದಲ್ಲಿ ನೀಡಿದ ಪ್ರಮುಖ ಭರವಸೆಗಳು ಹೀಗಿವೆ..
ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ.
ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿನ 10 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ.
26 ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ 24 ಮಹಿಳಾ ವಸತಿ ನಿಲಯಗಳ ಸ್ಥಾಪನೆ.
ನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಶೇ.44ರಷ್ಟು ಅವಕಾಶ.
ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಮೂಲಕ ಜಿಲ್ಲೆಗಳಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್ ಸ್ಥಾಪನೆ.
ಮಹಿಳಾ ಸ್ವಸಹಾಯ ಸಂಘಗಳು ಪಡೆಯುವ ಸಾಲದ ಮೇಲಿನ ಬಡ್ಡಿ ದರವನ್ನು ಶೇ.4ರಿಂದ ಶೂನ್ಯಕ್ಕೆ ಇಳಿಕೆ.
ಹೀಗೆ ಮಹಿಳಾ ಸಬಲೀಕರಣಕ್ಕಾಗಿ ಕಾಂಗ್ರೆಸ್ ಕೊಡುಗೆ ಅನ್ನೋ ಸಾಲುಗಳೊಂದಿಗೆ ನಾ ನಾಯಕಿ ಅನ್ನೋ ಸಮಾವೇಶ ನಡೆಸಲಾಯಿತು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತೆ. ಆಗ ಮಹಿಳೆಯರು ಸ್ವಾಭಿಮಾನದಿಂದ ಬದುಕುವಂತೆ ಮಾಡುತ್ತೇವೆ ಅನ್ನೋ ಭರವಸೆ ನೀಡಲಾಯಿತು.
ಈ ವೇಳೆ ಮಹಿಳಾ ಘಟಕದ ಅಧ್ಯಕ್ಷೆ, ಶಾಸಕಿ ಪುಷ್ಪಾ ಅಮರನಾಥ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ಸಚಿವೆಯರಾದ ಮೋಟಮ್ಮ, ಉಮಾಶ್ರೀ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್,ಪ್ರಸಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.