ಪ್ರಜಾಸ್ತ್ರ ಸುದ್ದಿ
ಸಿಂದಗಿ: ಸರ್ಕಾರಿ ಪ್ರಾಥಮಿಕ ಹಿರಿಯರ ಶಾಲೆಯಲ್ಲಿ ಕಳೆದ 12 ವರ್ಷಗಳಿಂದ ದೈಹಿಕ ಶಿಕ್ಷಕರ ನೇಮಕವಾಗಿಲ್ಲ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕು ಎಂದು, ವಿಜಯಪುರ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್ ಬೇವನೂರ ಹೇಳಿದರು.
ಸಂಘದ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಅವರನ್ನು ಪಟ್ಟಣದಲ್ಲಿ ಪಂಚಮಸಾಲಿ ಸಮಾಜ ಹಾಗೂ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಅವರು ಮೇಲಿನಂತೆ ಹೇಳಿದರು. ಶಿಕ್ಷಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳತ್ತ ಸರ್ಕಾರ ಗಮನ ನೀಡಿದರೆ ಒಳ್ಳೆಯದು ಎಂದರು.
ನಗರ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಎನ್ ಪಡಶೆಟ್ಟಿ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಬಿ.ಎ ಪಾಟೀಲ ಅವರನ್ನು ಸಹ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ ಹಂಗರಗಿ, ರೈತ ಸಂಘದ ರಾಜ್ಯ ಕಾರ್ಯದರ್ಶಿ ಪೀರು ಯರಗಲ, ಕಾಮಿಡಿ ಕಿಲಾಡಿ ಖ್ಯಾತಿಯ ಶಿವಾನಂದ ಸಿಂದಗಿ, ಚಂದ್ರಶೇಖರ ನಾಗರಬೆಟ್ಟ ಸೇರಿದಂತೆ ರಾಜಕೀಯ ಮುಖಂಡರು, ಪತ್ರಕರ್ತರು ಹಾಜರಿದ್ದರು.