ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ಟಾಂಗಾ ಏರಿ ವಿಧಾನಸೌಧಕ್ಕೆ ಬಂದಿದ್ದಾರೆ. ಸೈಕಲ್, ಎತ್ತಿನ ಗಾಡಿ ಬಳಿಕ ಶುಕ್ರವಾರ ಟಾಂಗಾ ಏರಿ ಸದನಕ್ಕೆ ಬರುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿದಂತೆ ಹಿರಿಯ ಕೈ ನಾಯಕರು ಟಾಂಗಾ ಏರಿ ಬರುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿ ವಿರುದ್ಧ ಕಿಡಿ ಕಾರಿದರು. ಈ ವೇಳೆ ಮಾತನಾಡಿದ ಡಿಕೆಶಿ, ಲೋಕಸಭಾ ಸ್ಪೀಕರ್ ಅವರು ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಲು ಬಂದಿದ್ದಾರೆ. ಕರೋನಾ ಸಂದರ್ಭದಲ್ಲಿ ಪ್ರತಿಯೊಂದರ ಬೆಲೆ ಗಗನಕ್ಕೆ ಏರಿಕೆಯಾಗಿದೆ. ನಾವು ಎಷ್ಟೂ ಹೇಳಿದರೂ ಕಣ್ಣು, ಕಿವಿ, ಬಾಯಿ ಇಲ್ಲದ ಎಮ್ಮೆ ಚರ್ಮದ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅಕ್ಟೋಬರ್ ತಿಂಗಳಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು.
ಇನ್ನು ಸಿದ್ದರಾಮಯ್ಯ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇವತ್ತು 3ನೇ ಹೋರಾಟ. ಮೋದಿ ಪ್ರಧಾನಿ ಆದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿವೆ. ರೈತರು, ಬಡವರು, ಕಾರ್ಮಿಕರು ಸೇರಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಬಿಜೆಪಿ ಕಾರ್ಪೂರೇಟರ್ ಗಳ ಪರವಾಗಿದೆ. ಕಾಂಗ್ರೆಸ್ ಯಾವತ್ತೂ ಜನಸಾಮಾನ್ಯರ ಪರ ಎಂದು ಹೇಳಿದರು.