ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಅದನ್ನು ತಳ್ಳಿ ಹಾಕಲಾಯಿತು. ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಒಪ್ಪಿಕೊಂಡರು. ತನಿಖೆ ನಡೆಯುತ್ತಿದ್ದಂತೆ ಒಂದೊಂದೇ ತಲೆಗಳು ಉರುಳಲು ಶುರು ಮಾಡಿದವು.
ಪೊಲೀಸ್ ಅಧಿಕಾರಿಗಳು, ರಾಜಕೀಯ ಮುಖಂಡರು, ಶಾಲಾ ಆಡಳಿತ ಮಂಡಳಿಯವರು ಒಬ್ಬೊಬ್ಬರ ಬಂಧನವಾಯಿತು. ಹೀಗಾಗಿ 545 ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಇದೀಗ ಅಂದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಈಗಿನ ಬೆಂಗಳೂರು ಆಂತರಿಕ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿದೆ. ಇದರಿಂದಾಗಿ ಸರ್ಕಾರಕ್ಕೆ ಮುಜುಗರವಾಗಿದೆ. ಇದೆ ಮೊದಲ ಬಾರಿಗೆ ಐಪಿಎಸ್ ಗ್ರೇಡಿನ ಹಿರಿಯ ಅಧಿಕಾರಿಯ ಬಂಧನವಾಗಿದೆ. ಹೀಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬರೀ ಅಧಿಕಾರಿಗಳನ್ನು ಹೊಣೆ ಮಾಡಿ ಜಾರಿಕೊಳ್ಳುವುದು ಬೇಡ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಮೊದಲು ಸಂಪುಟದಿಂದ ಅವರನ್ನು ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.