ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿದೆ. ಹೀಗಾಗಿ ವಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದೆ ಎಂದಿದ್ದಾರೆ.
ಜನರ ಗಮನ ಬೇರೆಡೆ ತಿರುಗಿಸಲು ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರ ಮನೆ, ಕಚೇರಿ ಮೇಲೆ ಎಸಿಬಿ ಮೂಲಕ ದಾಳಿ ಮಾಡಿಸಲಾಗಿದೆ. ಇಂಥಾ ರಾಜಕೀಯ ಪ್ರೇರಿತ ಎಸಿಬಿ ದಾಳಿಯನ್ನು ಖಂಡಿಸುತ್ತೇನೆ ಎಂದಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಮಟ್ಟದ ಉನ್ನತ ಅಧಿಕಾರಿಯೊಬ್ಬರು ಬಂಧಿತರಾಗಿರುವುದು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿ ನಡೆದಿರುವ ಇಂತಹ ಹಗರಣಗಳು ಯುವಕರ ಭವಿಷ್ಯವನ್ನು ನಾಶಮಾಡಬಲ್ಲವು ಎಂದಿದ್ದಾರೆ. ಕರ್ನಾಟಕವು ಬಿಜೆಪಿ ಭ್ರಷ್ಟಾಚಾರ ಕೇಂದ್ರವಾಗಿ ಮಾರ್ಪಟ್ಟಿದೆ. ಅದಕ್ಕಾಗಿ ರಾಜ್ಯ ಸರ್ಕಾರ ತನ್ನ ಆಡಳಿತ ಯಂತ್ರಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ದೇ ಗೃಹ ಸಚಿವ ಆರಾಗ ಜ್ಞಾನೇಂದ್ರ ರಾಜೀನಾಮಗೆ ಆಗ್ರಹಿಸಲಾಗಿದೆ.